
ಶಿವಮೊಗ್ಗ: ಬಿಡದಿ ಭಾಗದಲ್ಲಿನ ಫಲವತ್ತಾದ ಕೃಷಿ ಭೂಮಿಯನ್ನು ಟೌನ್ಶಿಪ್ ನಿರ್ಮಾಣಕ್ಕಾಗಿ ವಶಪಡಿಸಿಕೊಳ್ಳುವ ಕ್ರಮವನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್. ರಾಮಕೃಷ್ಣ ಆಗ್ರಹಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ವಿರೋಧದ ನಡುವೆಯೂ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ಕ್ರಮ ಖಂಡನೀಯವಾಗಿದೆ. ಈ ವಿಚಾರದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರೈತರ ಪರ ಹೋರಾಟ ಮುಂದುವರಿದಿದೆ ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಜೂನ್ 21ರಿಂದ 24ರವರೆಗೆ ನಿಖಿಲ್ ಕುಮಾರಸ್ವಾಮಿ ಅವರು ಬಿಡದಿ ಹಾಗೂ ಹಾರೋಹಳ್ಳಿ ಹೋಬಳಿಯ ಗ್ರಾಮಗಳಿಗೆ ಪಾದಯಾತ್ರೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು. ಈ ಪಾದಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದಲೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕದಿದಾಳ್ ಗೋಪಾಲ್, ರಾಕೇಶ್ ಡಿಸೋಜಾ, ಎಚ್.ಎಂ. ಸಂಗಯ್ಯ, ಗೀತಾ ಸತೀಶ್, ತ್ಯಾಗರಾಜ್, ನಾಗೇಶ್, ತಿಪ್ಪೇಸ್ವಾಮಿ, ಡಿ. ಕಾಂತರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
















Leave a Reply