ರಿಪ್ಪನ್ ಪೇಟೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಅಬ್ಬರಕ್ಕೆ ರಿಪ್ಪನ್ ಪೇಟೆ ಸುತ್ತಮುತ್ತ 60ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ. ಪರಿಣಾಮ ಜನರು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ.
ರಸ್ತೆ ಬದಿಯ ವಿದ್ಯುತ್ ಕಂಬದ ಮೇಲೆ ಭಾರಿ ಮರ ಉರುಳಿ ಬಿದ್ದ ಪರಿಣಾಮ ಕಂಬಗಳು ಮುರಿದು ಬಿದ್ದಿವೆ. ರಿಪ್ಪನ್ ಪೇಟೆ, ಬಾಳೂರು,ಕೋಡೂರು, ಚಿಕ್ಕಜೇನಿ, ಬೆಳ್ಳೂರು, ಹೆದ್ದಾರಿಪುರ,ಅರಸಾಳು,ಗರ್ತಿಕೆರೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹತ್ತಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾನಿಗೊಳಗಾದ ಕಂಬಗಳನ್ನು ಬದಲಿಸಿ ವಿದ್ಯುತ್ ಸಂಪರ್ಕವನ್ನು ಪುನಃಸ್ಥಾಪಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೆಸ್ಕಾಂ ಸಹಾಯಕ ಇಂಜಿನಿಯರ್ ಅಶ್ವಲ್ ಸುದ್ದಿಗಾರರೊಂದಿಗೆ ಮಾತನಾಡಿ , “ನೂತನ ವಿದ್ಯುತ್ ಕಂಬಗಳ ಪುನರ್ ಸ್ಥಾಪಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ಎಲ್ಲ ಪ್ರದೇಶಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು” ಎಂದು ಇಲಾಖೆ ಮನವಿ ಮಾಡಿದ್ದಾರೆ.
















Leave a Reply