ರಿಪ್ಪನ್ಪೇಟೆ: ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಶುಕ್ರವಾರ ಸಂಜೆ ಸುರಿದ ಭಾರಿ ಗಾಳಿ-ಮಳೆಯ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಮರವೊಂದು ಉರುಳಿ ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನೀಲಾವತಿ ಎಂದು ಗುರುತಿಸಲಾಗಿದೆ. ಅವರು ಗರ್ತಿಕೆರೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ತರಗತಿ ಮುಗಿಸಿ ಇಬ್ಬರು ಸ್ನೇಹಿತರೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಮಾರ್ಗ ಮಧ್ಯೆ ಭಾರಿ ಗಾಳಿ ಹಾಗೂ ಮಳೆಯ ಪರಿಣಾಮ ವಿದ್ಯುತ್ ತಂತಿಯೊಂದು ರಸ್ತೆಗೆ ಬಿದ್ದಿರುವುದನ್ನು ಗಮನಿಸಿದ ಮೂವರು ವಿದ್ಯಾರ್ಥಿಗಳು ಸುರಕ್ಷತೆಗಾಗಿ ಹಿಂದಕ್ಕೆ ಸರಿದು ಓಡಲು ಮುಂದಾಗಿದ್ದರು. ಇದೇ ವೇಳೆ ರಸ್ತೆ ಬದಿಯಲ್ಲಿದ್ದ ದೊಡ್ಡ ಮರವೊಂದು ಏಕಾಏಕಿ ಉರುಳಿ ನಿಖಿತಾ ಅವರ ಮೇಲೆ ಬಿದ್ದಿದೆ.
ಘಟನೆಯಿಂದ ನಿಖಿತಾ ಅವರ ಎಡಗಾಲಿಗೆ ತೀವ್ರ ಗಾಯವಾಗಿದ್ದು, ಕಾಲು ಮುರಿದಿರುವುದಾಗಿ ತಿಳಿದುಬಂದಿದೆ.
ವಿದ್ಯಾರ್ಥಿನಿಯ ಕಿರುಚಾಟ ಕೇಳಿ ಸ್ಥಳೀಯರು ತಕ್ಷಣ ಧಾವಿಸಿ ರಕ್ಷಿಸಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಾಯದ ತೀವ್ರತೆಯನ್ನು ಪರಿಗಣಿಸಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅಗತ್ಯವಿರುವುದರಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.













Leave a Reply