ಬೆಂಗಳೂರು: ಸಚಿವರಾಗಿ ಪುನರಾಯ್ಕೆಯಾದ ಬಳಿಕ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಸಚಿವ ಸ್ಥಾನ ನೀಡಿದ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು.
ಸೊರಬ ಕ್ಷೇತ್ರದ ಜನರು ತಮ್ಮನ್ನು ವಿಧಾನಸಭೆಗೆ ಕಳುಹಿಸಿ ಸೇವೆ ಮಾಡುವ ಅವಕಾಶ ಕಲ್ಪಿಸಿರುವುದಕ್ಕೂ ಧನ್ಯವಾದ ತಿಳಿಸಿದ ಅವರು, ರಾಜ್ಯದ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಸಂಕಲ್ಪ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಸುಮಾರು 60 ದಿನಗಳಿಂದ ಸಚಿವ ಸಂಪುಟ ಪುನಾರಚನೆಗಾಗಿ ಕಾಯುವುದು ಅನಿವಾರ್ಯವಾಗಿತ್ತು.
ಈಗ ಪುನರಾಯ್ಕೆಯಾಗಿರುವುದು ಸಂತಸ ತಂದಿದ್ದು, ಇದರೊಂದಿಗೆ ಜವಾಬ್ದಾರಿಯೂ ಮತ್ತಷ್ಟು ಹೆಚ್ಚಿದೆ. ಹೈಕಮಾಂಡ್ ತಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಕೆಲಸ ಮಾಡುವುದು ಮುಂದಿನ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ಶಿಕ್ಷಣ ಸಚಿವರಾಗಿ, ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಹಾಗೂ ಪ್ರಣಾಳಿಕೆ ರಚನಾ ಸಮಿತಿಯ ಉಪಾಧ್ಯಕ್ಷರಾಗಿ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿರುವ ತೃಪ್ತಿ ಇದೆ. ಟೀಕೆ-ಟಿಪ್ಪಣಿಗಳು ಹಾಗೂ ಅಪವಾದಗಳ ನಡುವೆಯೂ ಜನಪರ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದರು.
ಸಚಿವ ಖಾತೆ ಕುರಿತು ಪ್ರತಿಕ್ರಿಯಿಸಿದ ಅವರು, “ಯಾವುದೇ ಖಾತೆ ನೀಡಿದರೂ ಅಷ್ಟೇ ಸಮರ್ಥವಾಗಿ ನಿಭಾಯಿಸುತ್ತೇನೆ. ಯಾವ ಖಾತೆ ನೀಡಬೇಕು ಎಂಬುದು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನಿಸುವ ವಿಷಯ” ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ
ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿರುವ ಮಧು ಬಂಗಾರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಎನ್. ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಮಧು ಬಂಗಾರಪ್ಪ ಅವರನ್ನು ಅಭಿನಂದಿಸಿದರು.
















Leave a Reply