ರಿಪ್ಪನ್ಪೇಟೆ: ರಸ್ತೆ ದುರಸ್ತಿಗೆ ಆಗ್ರಹಿಸಿ ಸಂಪಳ್ಳಿ-ಕರಡಿಗ-ಬೆಳಕೋಡು-ಕೊಳವಳ್ಳಿ ಭಾಗದ ಗ್ರಾಮಸ್ಥರು ರಸ್ತೆಯ ಮೇಲೆಯೇ ಭತ್ತ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿತ್ತು.
ಈ ಕುರಿತು ವರದಿಗೆ ಪ್ರತಿಕ್ರಿಯಿಸಿ,ದೂರವಾಣಿಯೊಂದಿಗೆ ನಾಡಿನ್ಯೂಸ್ ಜೊತೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಅಗತ್ಯ ಪ್ರಮಾಣದ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಆರೋಪಿಸಿದರು.
ನಮ್ಮ ಕ್ಷೇತ್ರದ ಅನೇಕ ಗ್ರಾಮೀಣ ಭಾಗಗಳ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರಂತರವಾಗಿ ಮನವಿ ಮಾಡುತ್ತಲೇ ಇದ್ದೇವೆ. ಆದರೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು.
ಸಂಪಳ್ಳಿ–ಕರಡಿಗ–ಬೆಳಕೋಡು–ಗವಟೂರು ರಸ್ತೆ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಈ ಹಿಂದೆಯೇ ಸೇರಿಸಲಾಗಿದ್ದು, ಇದಕ್ಕೆ ಅನುಮೋದನೆಯೂ ದೊರೆತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಆದರೆ ಜನಸಂಖ್ಯೆ ಆಧಾರಿತ ಮಾನದಂಡ ಸೇರಿದಂತೆ ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆ ಅನುಷ್ಠಾನಗೊಳ್ಳಲು ಸಾಧ್ಯವಾಗಿಲ್ಲ. ಈ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದ್ದು, ಶಾಶ್ವತ ಸಮಸ್ಯೆ ನಿವಾರಣೆಯೊಂದಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ, ಅಲ್ಲಿಯವರೆಗೆ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡಿಕೊಡಲಾಗುವುದು ಎಂದು ಶಾಸಕ ಆರಗ ಜ್ಞಾನೇಂದ್ರ ಭರವಸೆ ನೀಡಿದರು.
ರಸ್ತೆ ಸಮಸ್ಯೆ ಶಾಶ್ವತವಾಗಿ ಬಗೆಹರಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಇದೀಗ ಶಾಸಕರ ಭರವಸೆಯ ನಂತರ ರಸ್ತೆ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿ ಯಾವಾಗ ಆರಂಭವಾಗಲಿದೆ ಎಂಬುದನ್ನು ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.

















Leave a Reply