ರಿಪ್ಪನ್ ಪೇಟೆ : ಗಾಳಿ ಸಹಿತ ಮಳೆಯಿಂದ ಮರ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಚಿಕಿತ್ಸೆಗೆ ಅಮೃತ (ಗರ್ತಿಕೆರೆ) ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಒಟ್ಟಾಗಿ ಆರೋಗ್ಯ ನಿಧಿ ಸಂಗ್ರಹಿಸಿ ಮಾನವೀಯತೆ ಮೆರೆದಿದ್ದಾರೆ.
ಜುಲೈ 24ರಂದು ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಯಿಂದ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೀಲಾವತಿ ಅವರ ಮೇಲೆ ಮರ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿದ್ಯಾರ್ಥಿನಿಯ ಕುಟುಂಬದ ಆರ್ಥಿಕ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿರುವುದನ್ನು ಅರಿತ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕ ವೃಂದ ಹಾಗೂ ಸಿಡಿಸಿ ಅಧ್ಯಕ್ಷರು ಚಿಕಿತ್ಸೆಗೆ ನೆರವಾಗಲು ಮುಂದಾದರು. ಎಲ್ಲರೂ ತಮ್ಮ ಕೈಲಾದಷ್ಟು ಹಣವನ್ನು ಸಂಗ್ರಹಿಸಿ ಒಟ್ಟು ₹32,600 ಮೊತ್ತವನ್ನು ವಿದ್ಯಾರ್ಥಿನಿಯ ಚಿಕಿತ್ಸೆಗೆಂದು ಪೋಷಕರಿಗೆ ಹಸ್ತಾಂತರಿಸಿದರು.

ಸಂಕಷ್ಟದಲ್ಲಿರುವ ಸಹಪಾಠಿಯ ನೆರವಿಗೆ ಧಾವಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದ ವಿದ್ಯಾರ್ಥಿಗಳ ಕಾರ್ಯಕ್ಕೆ ಕಾಲೇಜಿನ ಪ್ರಾಚಾರ್ಯರು, ಸಿಡಿಸಿ ಅಧ್ಯಕ್ಷರು ಹಾಗೂ ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಭಾರ ಪ್ರಾಂಶುಪಾಲರಾದ ಹಾಲಪ್ಪ ಸಂಕೂರು , ಸಿಡಿಸಿ ಕಾರ್ಯಾಧ್ಯಕ್ಷ ಟಿಡಿ ಸೋಮಶೇಖರ, ಶಿಕ್ಷಕ ಬಂಡಿ ಸೋಮಶೇಖರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
















Leave a Reply