
ರಿಪ್ಪನ್ ಪೇಟೆ : ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬೊಲೆರೋ ಪಿಕಪ್ ವಾಹನ ಮತ್ತು ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯ ತೀವ್ರತೆಗೆ ಬೊಲೆರೋ ವಾಹನದ ಮುಂಭಾಗ ನುಚ್ಚುಗುಜ್ಜಾಗಿದೆ.
ಮಾಹಿತಿಯ ಪ್ರಕಾರ, ಶಿಕಾರಿಪುರ ತಾಲೂಕಿನ ಓತಿನಕಟ್ಟೆ ಗ್ರಾಮದವರನ್ನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನವು ರಿಪ್ಪನ್ ಪೇಟೆ- ಆನಂದಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ನೆರವಿಗೆ ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಗಾಯಗೊಂಡವರನ್ನು ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರವನ್ನು ಸುಗಮಗೊಳಿಸುವ ಕಾರ್ಯ ಕೈಗೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
















Leave a Reply