ಹೊಸನಗರ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಹರತಾಳು ಹಾಲಪ್ಪ ಹೇಳಿದ್ದಾರೆ.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೌಗೋಳಿಕವಾಗಿ ವಿಶಾಲವಾಗಿದ್ದರೂ ಹಿಂದಿನ ಕ್ಷೇತ್ರ ಮರುರಚನೆಯ ಸಂದರ್ಭದಲ್ಲಿ ಹೊಸನಗರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಿತ್ತು. ಆಗ ಕುಲದೀಪ್ ಸಿಂಗ್ ಆಯೋಗದ ಮುಂದೆ ನಮ್ಮ ಅಹವಾಲು ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಆ ಸಮಯದಲ್ಲಿ ನಡೆದ ಕ್ಷೇತ್ರ ಮರುರಚನೆ ಅವೈಜ್ಞಾನಿಕವಾಗಿತ್ತು ಎಂದು ಟೀಕಿಸಿದರು.
2021ರಿಂದ ಹೊಸನಗರ ಕ್ಷೇತ್ರ ಪುನರ್ರಚನೆಗಾಗಿ ಹೋರಾಟಗಳು ಆರಂಭವಾಗಿದ್ದವು. ಬಿ.ಎಲ್. ಶಂಕರ್ ಸೇರಿದಂತೆ ಹಲವು ರಾಜ್ಯ ನಾಯಕರು ಜೊತೆ ಚರ್ಚೆ ನಡೆಸಲಾಗಿತ್ತು. ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ಇಂತಹ ಸಮಸ್ಯೆಗಳು ಎದುರಾಗಿದ್ದವು. ಆದರೆ ಆ ಸಂದರ್ಭದಲ್ಲಿ ಹೋರಾಟಕ್ಕೆ ಯಶಸ್ಸು ಸಿಕ್ಕಿರಲಿಲ್ಲ ಎಂದರು.
ಈಗ ಕೇಂದ್ರ ಸರ್ಕಾರ ಕ್ಷೇತ್ರ ಮರುರಚನೆ ಪ್ರಸ್ತಾವನೆ ರೂಪಿಸಿದ್ದು, ಶೀಘ್ರದಲ್ಲೇ ಲೋಕಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಹೊಸ ವಿಧಾನ ಜಾರಿಗೆ ಬಂದಲ್ಲಿ ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕ್ಷೇತ್ರ ಮರುರಚನೆ ಒಂದು ಸೂಕ್ಷ್ಮ ವಿಷಯವಾಗಿದ್ದು, ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ವಿಧೇಯಕ ಅಂಗೀಕಾರವಾಗಬೇಕಿದೆ. ಕೇಂದ್ರ ಸರ್ಕಾರ ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.
ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಬಿಜೆಪಿ ಬೆಂಬಲ ಸೂಚಿಸಿದೆ. ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಪಕ್ಷದ ನಾಯಕರು ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್, ಎನ್.ಆರ್. ದೇವಾನಂದ್, ಮಾಜಿ ಶಾಸಕ ಬಿ.ಸ್ವಾಮಿರಾವ್, ಎ.ವಿ. ಮಲ್ಲಿಕಾರ್ಜುನ, ಹಾಲಗದ್ದೆ ಉಮೇಶ್, ಎಂ.ಎನ್. ಸುಧಾಕರ್, ಆಳುವಳ್ಳಿ ವೀರೇಶ್, ಮಹೇಶ್, ಬಿ. ಯುವರಾಜ್ ಗೌಡ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

















Leave a Reply