ಹೊಸನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಹೊಸನಗರ ತಾಲ್ಲೂಕಿನ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿರುವ ಆರೋಪಿಸಿ ಬಿಜೆಪಿ ತಾಲ್ಲೂಕು ಮಂಡಳಿ ವತಿಯಿಂದ ಸೋಮವಾರ ಹೊಸನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ತಾಲ್ಲೂಕು ಕಚೇರಿ ಮುಂಭಾಗ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನ ನೆಲ, ಜಮೀನು ಮತ್ತು ಮನೆಗಳನ್ನು ಕಳೆದುಕೊಂಡಿರುವ ಅನೇಕ ಕುಟುಂಬಗಳಿರುವ ಹೊಸನಗರ ತಾಲ್ಲೂಕು ಇಂದು ವಿದ್ಯುತ್ ಹಾಗೂ ಮೂಲಸೌಕರ್ಯ ಸಮಸ್ಯೆಗಳಿಂದ ಬಳಲುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಮೂರೂವರೆ ವರ್ಷ ಕಳೆದಿದ್ದರೂ ತಾಲ್ಲೂಕಿನ ಅಭಿವೃದ್ಧಿಗೆ ಅಗತ್ಯ ಆದ್ಯತೆ ದೊರೆತಿಲ್ಲ. ಸರ್ಕಾರದ ಜನವಿರೋಧಿ ನೀತಿಗಳನ್ನು ಬಿಜೆಪಿ ವಿರೋಧಿಸುತ್ತಿದ್ದು, ಜನರು ಈಗಲೇ ಎಚ್ಚರಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸರ್ಕಾರದ ಹಣಕಾಸಿನ ಸ್ಥಿತಿ, ಸಚಿವ ಸಂಪುಟ ಹಾಗೂ ವಿವಿಧ ಆಡಳಿತಾತ್ಮಕ ವಿಚಾರಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ ಜ್ಞಾನೇಂದ್ರ, ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡರೆ ಪಕ್ಷವು ಸುಮ್ಮನಿರುವುದಿಲ್ಲ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿ ಸುಮಾರು 3,500 ಫಲಾನುಭವಿಗಳಿಗೆ ಕಳೆದ ಆರು ತಿಂಗಳಿಂದ ಹಣ ಪಾವತಿಯಾಗಿಲ್ಲ ಎಂದು ಆರೋಪಿಸಿದರು. ಪ್ರತಿ ತಿಂಗಳು ಸುಮಾರು ₹35 ಲಕ್ಷದಷ್ಟು ಹಣ ಫಲಾನುಭವಿಗಳಿಗೆ ತಲುಪದೆ ಉಳಿಯುತ್ತಿದೆ ಎಂದು ಅವರು ಹೇಳಿದರು.
ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕ್ಷೇತ್ರದ ಅಭಿವೃದ್ಧಿಗಿಂತ ಸಚಿವ ಸ್ಥಾನಕ್ಕಾಗಿ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದು ಆರೋಪಿಸಿದ ಹಾಲಪ್ಪ, ತಾಲ್ಲೂಕಿನಲ್ಲಿ ಬೆಳೆ ಪರಿಹಾರ, ಮಳೆಮಾಪನ, ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಹಲವು ಸಮಸ್ಯೆಗಳು ಬಾಕಿ ಉಳಿದಿವೆ ಎಂದರು.

ಬಿಜೆಪಿ ತಾಲ್ಲೂಕು ಮಂಡಲದ ಅಧ್ಯಕ್ಷ ಸತೀಶ್ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಯಡಿ ಸುಮಾರು 35 ಸಾವಿರ ಪಿಂಚಣಿಗಳನ್ನು ರದ್ದುಪಡಿಸಲಾಗಿದ್ದು, ಫಲಾನುಭವಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿದರು. ವೃದ್ಧರು, ಅಂಗವಿಕಲರು ಹಾಗೂ ವಿಧವೆಯರಿಗೆ ತೊಂದರೆಯಾಗದಂತೆ ತಡೆಹಿಡಿದಿರುವ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯರಾದ ಉಮೇಶ್ ಕಂಚುಗಾರ್, ಎನ್.ಆರ್. ದೇವಾನಂದ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

















Leave a Reply