
ಹೊಸನಗರ: ಹೊಸನಗರ ತಾಲ್ಲೂಕಿನಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹದ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ತಾಲ್ಲೂಕು ಕಂದಾಯ ಅಧಿಕಾರಿ ಭರತ್ರಾಜ್ ತಿಳಿಸಿದ್ದಾರೆ.
ಇದಲ್ಲದೆ, ಗ್ರಾಮಾಂತರ ಪ್ರದೇಶಗಳಿಂದ ಹಳ್ಳ-ಕೊಳ್ಳಗಳನ್ನು ದಾಟಿ ಶಾಲೆ ಮತ್ತು ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಂಚರಿಸುವ ಹಿನ್ನೆಲೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಾರ್ವಜನಿಕರು ಯಾವುದೇ ರೀತಿಯ ಅಪಾಯ ಅಥವಾ ಅನಾಹುತ ಸಂಭವಿಸಿದಲ್ಲಿ ತಾಲ್ಲೂಕು ಆಡಳಿತದ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 9741621135 ಗೆ ಸಂಪರ್ಕಿಸಬಹುದಾಗಿದೆ. ಜೊತೆಗೆ ಸಂಬಂಧಪಟ್ಟ ಪಿ.ಡಿ.ಓ ಹಾಗೂ ಗ್ರಾಮ ಆಡಳಿತಾಧಿಕಾರಿಗಳನ್ನು ಕೂಡ ತಕ್ಷಣ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಮುಂದಿನ ಮೂರು ತಿಂಗಳುಗಳ ಕಾಲ ಎಲ್ಲಾ ಅಧಿಕಾರಿಗಳು ಸ್ಥಳೀಯವಾಗಿ ವಾಸವಿದ್ದು, ತಮ್ಮ ವ್ಯಾಪ್ತಿಯಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಭರತ್ರಾಜ್ ತಿಳಿಸಿದ್ದಾರೆ.

















Leave a Reply