ಹೊಸನಗರ: ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸನ್ನು ಆರೋಗ್ಯಕರವಾಗಿ ಕಾಯ್ದುಕೊಳ್ಳಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪ ಗೌಡರ್ ಹೇಳಿದರು.
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರದ ಆರ್ಯಈಡಿಗರ ಸಭಾಭವನದ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗಾಗಿ ಮೂರು ದಿನಗಳ ಯೋಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಗವು ಮನಸ್ಸಿಗೆ ಶಾಂತಿ ನೀಡುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತೂಕ ನಿಯಂತ್ರಣ, ದೈಹಿಕ ಸದೃಢತೆ ಹಾಗೂ ಮಾನಸಿಕ ಸಮತೋಲನಕ್ಕೆ ಯೋಗ ಸಹಕಾರಿಯಾಗಿದೆ. ಯೋಗವು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪೂರಕ ಚಿಕಿತ್ಸೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.
ಬೆಳೆಯುವ ಮಕ್ಕಳಲ್ಲಿ ಯೋಗ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಮಹಿಳೆಯರು ಯೋಗಾಭ್ಯಾಸ ಮಾಡುವುದರಿಂದ ಹಾರ್ಮೋನ್ ಸಮತೋಲನ ಹಾಗೂ ಗರ್ಭಕೋಶದ ಆರೋಗ್ಯಕ್ಕೆ ಸಹಕಾರ ದೊರೆಯುತ್ತದೆ. ಪ್ರತಿದಿನ ಬೆಳಿಗ್ಗೆ ಯೋಗ, ವ್ಯಾಯಾಮ ಹಾಗೂ ಪ್ರಾಣಾಯಾಮ ಮಾಡುವ ಅಭ್ಯಾಸದಿಂದ ದೇಹ ಸದಾ ಚುರುಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.
ಪ್ರತಿಯೊಬ್ಬರೂ ದಿನಕ್ಕೆ ಕನಿಷ್ಠ ಒಂದು ಗಂಟೆಯಾದರೂ ಯೋಗಕ್ಕೆ ಸಮಯ ಮೀಸಲಿಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡಿದ ಅವರು, ಯೋಗವನ್ನು ನಿರಂತರವಾಗಿ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಈ ಶಿಬಿರದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
















Leave a Reply