
ಹೊಸನಗರ: ಮಹಾರಾಷ್ಟ್ರದಲ್ಲಿ ಕರ್ನಾಟಕದಿಂದ ಸಾಗಾಟವಾಗುತ್ತಿರುವ ಅಡಿಕೆ ಲಾರಿಗಳನ್ನು ತಡೆದು ನಿಲ್ಲಿಸುತ್ತಿರುವ ಕ್ರಮ ಸೂಕ್ತವಲ್ಲ. ಇದರಿಂದ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಹೊಸನಗರ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ.ವಿ. ಜಯರಾಮ್ ಆಗ್ರಹಿಸಿದರು.
ಹೊಸನಗರದಲ್ಲಿ ನಡೆದ ಸಭೆಯ ಬಳಿಕ ತಹಶೀಲ್ದಾರ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಈಗಾಗಲೇ ಅಡಿಕೆ ಬೆಲೆ ಕುಸಿತದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಿಕೆ ಲಾರಿಗಳನ್ನು ತಡೆದು ನಿಲ್ಲಿಸುತ್ತಿರುವುದು ರೈತರ ಮೇಲಿನ ಹೆಚ್ಚುವರಿ ಹೊರೆ ಆಗಿದೆ ಎಂದು ಅವರು ಹೇಳಿದರು.
ಮಲೆನಾಡು ಭಾಗದಲ್ಲಿ ಎಲೆ ಚುಕ್ಕಿ ರೋಗ, ಅತಿಯಾದ ಮಳೆ, ವಿಮೆ ಪರಿಹಾರದಲ್ಲಿ ಉಂಟಾಗಿರುವ ಸಮಸ್ಯೆಗಳು ಸೇರಿದಂತೆ ಹಲವು ಕಾರಣಗಳಿಂದ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಸಾಗಾಟಕ್ಕೆ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ನಿವೇಣ ನಾಗೇಶ್ ಕೆ.ಎಸ್., ಬಿ.ಎನ್. ಗುರುಮೂರ್ತಿ, ಈಶ್ವರಪ್ಪ ಬಿ., ನಾಗೇಶ್ ಕೆ.ಟಿ., ಮಹೇಂದ್ರ ಪಿ.ಸಿ., ಎಚ್.ಆರ್. ದೇವೇಂದ್ರಪ್ಪ, ಹೇಮಾವತಿ, ಹೂವಮ್ಮ, ನರೇಂದ್ರ, ಸತೀಶ್ ಎಂ.ಟಿ., ನಾಗೇಂದ್ರ, ನಿಜಲಿಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.















Leave a Reply