ರಿಪ್ಪನ್ಪೇಟೆ: ಗೋಕಳ್ಳ ಸಾಗಣೆ ತಡೆಯಲು ಮುಂದಾದ ಬಜರಂಗದಳದ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ರಿಪ್ಪನ್ಪೇಟೆ ಸಮೀಪದ ಹರತಾಳು ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ಮನೆಯೊಂದರಿಂದ ಗೋವುಗಳನ್ನು ಕದ್ದು ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಇದನ್ನು ತಡೆಯಲು ಬಜರಂಗದಳದ ಕಾರ್ಯಕರ್ತರಾದ ಚಂದನ್, ಕಿರಣ್ ಹಾಗೂ ಅಭಿಲಾಷ್ ಮುಂದಾಗಿದ್ದರು ಎನ್ನಲಾಗಿದೆ.
ಕಾರ್ಯಕರ್ತರು ಪಿಕಪ್ ವಾಹನವನ್ನು ಬೆನ್ನಟ್ಟುತ್ತಿದ್ದ ವೇಳೆ, ದುಷ್ಕರ್ಮಿಗಳು ವಾಹನವು ಪೊಲೀಸ್ ಬ್ಯಾರಿಕೇಡ್ಗಳಿಗೆ ಡಿಕ್ಕಿ ಹೊಡೆದು ಮುಂದುವರಿದಿದ್ದು, ಬಳಿಕ ಶಿಕಾರಿಪುರ ಸಮೀಪದ ಸಾಲೂರುವರೆಗೆ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಲಾಗಿದೆ ಎಂದು ಹೇಳಲಾಗುತ್ತಿದೆ..
ಸಾಲೂರು ಬಳಿ ಆರೋಪಿಗಳು ತಮ್ಮ ಸಹಚರರನ್ನು ಕರೆಸಿಕೊಂಡು, ಬಜರಂಗದಳ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ, ಕಾರ್ಯಕರ್ತರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಲಾಂಗು-ಮಚ್ಚು ಸೇರಿದಂತೆ ಮಾರಕಾಸ್ತ್ರಗಳನ್ನು ಬಳಸಿ ಬೆದರಿಕೆ ಹಾಕಿ, ಧಾರ್ಮಿಕವಾಗಿ ನಿಂದಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಬಳಸಲಾಗಿದೆ ಎನ್ನಲಾದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯಲ್ಲಿ ಗಾಯಗೊಂಡ ಕಾರ್ಯಕರ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಶಿಕಾರಿಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಸಂಪೂರ್ಣ ಹಿನ್ನೆಲೆ, ಗೋಕಳ್ಳ ಸಾಗಣೆ ಆರೋಪ ಹಾಗೂ ಹಲ್ಲೆಯಲ್ಲಿ ಭಾಗಿಯಾಗಿರುವವರ ಕುರಿತು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಹಿಂದೂ ಸಂಘಟನೆಗಳ ಆಕ್ರೋಶ
ಅಕ್ರಮ ಗೋಕಳ್ಳ ಅವ್ಯಹತವಾಗಿ ನಡೆಯುತ್ತಿದ್ದು ಪೊಲೀಸ್ ಇಲಾಖೆ ಕೈಕಟ್ಟಿ ಕೊಂಡು ಕುಳಿತಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ ದುಷ್ಕರ್ಮಿಗಳು ಪೊಲೀಸ್ ಬ್ಯಾರಿಕೆಡ್ ಗಳನ್ನೇ ಮುರಿದು ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ ಹೊಡೆದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಇದನ್ನು ಹಿಂದು ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ತಕ್ಷಣದಲ್ಲಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

















Leave a Reply